Pages

Wednesday, September 30, 2009

ಕರ್ಕಿಯವರ ದಿವ್ಯ ಜ್ಯೋತಿ!

ದಿವ್ಯ ಜ್ಯೋತಿ
ತಿಳಿ ನೀಲದಲ್ಲಿ ತಾ ಲೀನವಾಗಿ ಅವ ಹೋದ ದೂರ ದೂರ
ಬೆಳಗಿಹುದು ಇಲ್ಲಿ ಅವ ಬಿಟ್ಟ ಬೆಳಕು: ಇನ್ನೊಮ್ಮೆ ಏಕೆ ಬಾರ?

ಅಂದು ಸಂಜೆ ಪ್ರಾಥಱನೆಗೆ ದೇವಮಂದಿರದ ದಾರಿಯಲ್ಲಿ
ಆಚೆ ಈಚೆ ಮೊಮ್ಮಕ್ಕಳಿಬ್ಬರಲಿ ಮೈಯಭಾರ ಚೆಲ್ಲಿ
ಜಗದ ಕರುಣೆ ನಡೆವಂತೆ ನಡೆದು ಮಂದಿರದ ಪೀಠವೇರಿ
ನಿಂದನಿಲ್ಲೊ! ಜಡವುಳಿದು ಜೀವವೊಂದಾಯ್ತು ದೇವನಲ್ಲಿ.

ಎಸೆದ ಗುಂಡಿಗಾ ಕುಸಿದ ದೇಹದಲಿ ವಿಮಲ ರಕ್ತ ಚೆಲ್ಲಿ
ಮೀಯಿಸಿತ್ತು ಈ ಜಗದ ಮನವನೇ ಶೋಕ ಜಲಧಿಯಲ್ಲಿ
ಮುಗಿದ ಕೈಯು ಮುಗಿದಂತೆ ಇತ್ತು: ನೆಲಸಿತ್ತು ಕ್ಷಮೆಯು ಮೊಗದಿ
ಎದೆಯೊಳೆಂಥ ತಿಳಿಭಾವವಿತ್ತು! ಅದನಾವ ಬಲ್ಲ ಜಗದಿ?

ಹೋದ ಹೋದನವ ತ್ಯಾಗಜೀವನದ ತುತ್ತ ತುದಿಯನೇರಿ
ಏರಿ ಏರಿದೊಲು ಅಂತರಂಗದೈಸಿರಿಯ ಜಗಕೆ ತೂರಿ
ಸತ್ಯ ಪ್ರೇಮಗಳ ಸತ್ವವನ್ನೆ ಕಣ್ಣೆದುರು ಎತ್ತಿ ತೋರಿ
ಬೇರೆ ಲೋಕದನುಭಾವ ಬೀರಿ ಹೋದನಾವ ದಾರಿ?

ಎನಿತು ಸರಳ ನುಡಿ, ಎಷ್ಟು ಸಹಜ ನಡೆ ಮನದ ಮಹತಿಯೇನು!
ಅವನ ಎದೆಯ ಉನ್ನತಿಯ ನಿಲುಕುವುದು ಯಾವ ಗಿರಿಯ ಸಾನು?
ಇಹುದೆ ಅವನ ಕರುಣೆಯನು ಧರೆಗೆ ಕರೆವಂಥ ಕಾಮಧೇನು?
ಅವನು ಗೈದ ಲೀಲೆಯಲಿ ಲಯಸಿತೆಂಥವರ "ನಾನು-ನಾನು ".

ತಿಳಿದಿಹುದು ಚಿತ್ತ, ಹರಿದಿಹುದು ನೋಟ ಮೇಲಕ್ಕೆ ಬಾನಿನೆಡೆಗೆ
ಆ ಜಾಡ ಹಿಡಿದು ಇಳಿದಂತೆ ಇಹುದು ಬೆಳಕೊಂದು ಕೆಳಗೆ ಇಳೆಗೆ
"ಏನಷ್ಟು ಭ್ರಾಂತಿ? ಕಾಣದೆಯೆ ಜ್ಯೋತಿ?" ಎಂಬರುಹು ಮೂಡಲೊಡನೆ
ಬೆಳಕ ನಂಬಿ ನಿಂದಿಹನು ಧೀರ ಎದೆ ತೆರೆದು ನಾಡ ಕರೆಗೆ.
--ಡಾ ದುಂಡಪ್ಪ ಸಿದ್ಧಪ್ಪ ಕರ್ಕಿ

ಯಾವುದೇ ಕನ್ನಡ ಸಮಾರಂಭ ಸಾಮಾನ್ಯವಾಗಿ ಶುರುವಾಗುವುದು "ಹಚ್ಚೇವು ಕನ್ನಡದ ದೀಪ" ಭಾವ ಗೀತೆಯಿಂದ. ಹಾಡು ಇಲ್ಲಿ ಕೇಳಿ ಈ ಗೀತೆಯಿಂದ, ಇದರ ರಚನಕಾರ "ಡಾ ದುಂಡಪ್ಪ ಸಿದ್ಧಪ್ಪ ಕರ್ಕಿ" ಯವರು ಕನ್ನಡಿಗರ ಮನೆಮಾತಾಗಿಬಿಟ್ಟಿದ್ದಾರೆ. ಇವರ ಕವನ ಸಂಕಲನಗಳು ನಕ್ಷತ್ರ ಗಾನ, ಭಾವ ತೀರ್ಥ, ಗೀತ ಗೌರವ, ಕರಿಕೆ ಕಣಗಿಲು, ನಮನ, ತನನ ತೋಂ, ಬಣ್ಣದ ಚೆಂಡು... ನಕ್ಷತ್ರ ಗಾನ ಪ್ರಕಟವಾದ ಕರ್ಕಿಯವರ ಮೊದಲ ಕವನ ಸಂಕಲನ. ’ಹಚ್ಚೇವು ಕನ್ನಡದ ದೀಪ’ ವನ್ನು ಒಳಗೊಂಡಿರುವ ಕವನಸಂಕಲನ ಇದು. ಭಾವತೀರ್ಥ ದಲ್ಲಿ, ನಮ್ಮ ನಾಡಿನ ಕಾರಾವರ, ಗೋಕರ್ಣ, ಕೂಡಲ ಸಂಗಮ, ಜೋಗ ಇತ್ಯಾದಿ ಹಲವಾರು ಪ್ರೇಕ್ಷಣೀಯ ಸ್ಥಳಗಳ ವರ್ಣನೆಯಿದೆ. ಕರ್ಕಿಯವರು ಮಕ್ಕಳಿಗಾಗಿ ರಚಿಸಿರುವ ಬಣ್ಣದ ಚೆಂಡು (ನನ್ನ ಮಗಳ ಬ್ಲಾಗ್ ನಲ್ಲಿದೆ ಓದಿ) ಮತ್ತು ತನನ ತೋಂ ಕವನ ಸಂಕಲನಗಳು ಬಹಳ ಸರಳವಾಗಿದ್ದು, ಮಕ್ಕಳಿಗೆ ಕಲಿಸಿಕೊಡಲು ಚೆನ್ನಾಗಿವೆ. ಬೆಲ್ಲ ತಿನ್ನುವ ಮಲ್ಲ ಇತ್ಯಾದಿ ಕಥಾನಕ ಪದ್ಯಗಳಾಗಿದ್ದು ಮಕ್ಕಳಲ್ಲಿ ಆಸಕ್ತಿ ಮೂಡಿಸುವಂತವಾಗಿವೆ. ಕರ್ಕಿಯವರ "ದಿವ್ಯ ಜ್ಯೋತಿ", ಮಹಾತ್ಮ ಗಾಂಧಿಯವರು ಮರಣ ಹೊಂದಿದಾಗ ಬರೆದ ಕವನ.

ಕರ್ಕಿಯವರ ತನನ ತೋಂ ಜೊತೆಗೆ ಈ ಕವನವನ್ನು ಕಳುಹಿಸಿ ಕೊಟ್ಟ ಮಂಜುನಾಥ್ ಬೊಮ್ಮನಕಟ್ಟಿ ಅವರಿಗೆ ವಂದನೆಗಳು!!